Malenadu Mitra
ರಾಜ್ಯಶಿವಮೊಗ್ಗ

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆಗೆ ಕ್ರಮ

ಕೊರೊನ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಅವರು ಬುಧವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೊನ ಪೀಡಿತರ ನಿರ್ವಹಣೆಗೆ ಕೈಗೊಳ್ಳಲಾಗಿರುವ ಕ್ರಮಗಳ ಪರಿಶೀಲನೆ ನಡೆಸಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.

ಬುಧವಾರ ರಾತ್ರಿ 9ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ರಾತ್ರಿ ಕರ್ಫ್ಯೂಆರಂಭವಾಗಲಿದ್ದು, ಈ ಅವಧಿಯಲ್ಲಿ ಯಾವುದೇ ಚಟುವಟಿಕಗಳಿಗೆ ಅವಕಾಶವಿರುವುದಿಲ್ಲ. ಶುಕ್ರವಾರ ರಾತ್ರಿ 9ಗಂಟೆಯಿಂದ ಸೋಮವಾರ ಬೆಳಿಗ್ಗೆ 6ಗಂಟೆಯವರೆಗೆ ಪೂರ್ಣ ಕರ್ಫ್ಯೂ ಜಾರಿಯಾಗಲಿದ್ದು, ಇದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವ ಕುರಿತು ಈಗಾಗಲೇ ಪೊಲೀಸ್ ಇಲಾಖೆಗೆ ಸೂಚನೆಗಳನ್ನು ನೀಡಲಾಗಿದೆ. ಜನರು ಮನೆಯ ಒಳಗೆ ಇದ್ದು, ಕರೊನಾ ನಿಯಂತ್ರಣದಲ್ಲಿ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಜನರು ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನು ಪಾಲಿಸಬೇಕು. ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಅನುಷ್ಟಾನಗೊಳಿಸಲು ತಾಲೂಕು ಮಟ್ಟದಲ್ಲಿ ಕಣ್ಗಾವಲು ತಂಡಗಳನ್ನು ಈಗಾಗಲೇ ರಚಿಸಲಾಗಿದ್ದು, ತಹಶೀಲ್ದಾರ್‍ಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ದೇಹದ ತಾಪಮಾನವನ್ನು ಪರೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಕರೋನಾ ನಿಯಂತ್ರಣಕ್ಕೆ ವ್ಯವಸ್ಥಿತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹಲವು ತಂಡಗಳನ್ನು ರಚಿಸಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಈ ನೋಡಲ್ ಅಧಿಕಾರಿಗಳು ಪ್ರತಿ ದಿನ ಜಿಲ್ಲಾಡಳಿತಕ್ಕೆ ವರದಿ ನೀಡುತ್ತಿದ್ದು, ಅದರ ಆಧಾರದಲ್ಲಿ ವ್ಯವಸ್ಥೆಯನ್ನು ಸುಧಾರಿಸಲಾಗುತ್ತಿದೆ ಎಂದು ಹೇಳಿದರು,

ವ್ಯವಸ್ಥೆ ಸುಧಾರಣೆ:

ಚಿಕಿತ್ಸೆ ಅಗತ್ಯವಿರುವ ಕೊರೊನ ಪಾಸಿಟಿವ್ ವ್ಯಕ್ತಿಗಳನ್ನು ಮೆಗ್ಗಾನ್‍ನಲ್ಲಿ ಅಡ್ಮಿಟ್ ಮಾಡಲಾಗುತ್ತಿದೆ. ವೈದ್ಯಕೀಯ ನಿಗಾ ಅಗತ್ಯವಿರುವ ವ್ಯಕ್ತಿಗಳಿಗಾಗಿ ಪ್ರಸ್ತುತ ಗಾಜನೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಇಲ್ಲಿ ವೈದ್ಯರ ನೇತೃತ್ವದ ತಂಡ ರೋಗಿಗಳ ಆರೋಗ್ಯದ ಮೇಲೆ ನಿಗಾ ಇರಿಸಲಿದೆ. ಹೋಂ ಐಸೋಲೇಷನ್‍ನಲ್ಲಿರುವವರ ಮೇಲೆ ನಿಗಾ ಇರಿಸಲು ರ್ಯಾಂಡಂಮ್ ಆಗಿ ಮನೆಗಳಿಗೆ ಭೇಟಿ ನೀಡಲು ಆರೋಗ್ಯ ಕಾರ್ಯಕರ್ತರ ತಂಡಗಳನ್ನು ರಚಿಸಲಾಗಿದೆ. ಪಾಸಿಟಿವ್ ವ್ಯಕ್ತಿಗಳ ತಪಾಸಣೆ ನಡೆಸಲು ಆಯುರ್ವೇದ ಮಹಾವಿದ್ಯಾಲಯ ಮಾತ್ರವಲ್ಲದೆ ಶಿಕಾರಿಪುರ, ತೀರ್ಥಹಳ್ಳಿ, ಭದ್ರಾವತಿ ಮತ್ತು ಸಾಗರದಲ್ಲಿ ಟ್ರಯಾಜ್ ಸೆಂಟರ್‍ಗಳನ್ನು ಆರಂಭಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಬೆಡ್‍ಗಳನ್ನು ಕಾಯ್ದಿರಿಸಲು ಸೂಚನೆ ನೀಡಲಾಗಿದ್ದು, ಪ್ರಸ್ತುತ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ 80ಬೆಡ್‍ಗಳ ಸೌಲಭ್ಯ ಬಳಸಿಕೊಳ್ಳಲಾಗುತ್ತಿದೆ ಎಂದರು.

ಚುನಾವಣಾ ಪ್ರಚಾರ: ಸೂಚನೆ ನೀಡಲಾಗಿದೆ.

ತೀರ್ಥಹಳ್ಳಿ ಮತ್ತು ಭದ್ರಾವತಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ. ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ. ಯಾವುದೇ ಕಾರಣಕ್ಕೂ ಗುಂಪು ಸೇರಲು ಅವಕಾಶವಿಲ್ಲ. ಕಫ್ರ್ಯೂ ಅವಧಿಯಲ್ಲಿ ಯಾವುದೇ ರೀತಿಯ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

: ಪ್ರತಿ ದಿನ 3ಸಾವಿರ ಮಂದಿಯ ಕೊರೊನ ತಪಾಸಣೆ ನಡೆಸಬೇಕು. ತಪಾಸಣಾ ವರದಿ ಗರಿಷ್ಟ 36ಗಂಟೆಯ ಒಳಗಾಗಿ ಲಭಿಸುವಂತೆ ವ್ಯವಸ್ಥೆ ಮಾಡಬೇಕು ಎಂದು ಶಿಮ್ಸ್ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಶಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಡಾ.ಶ್ರೀಧರ್, ಡಿಎಚ್‍ಒ ಡಾ.ರಾಜೇಶ ಸುರಗಿಹಳ್ಳಿ, ಡಾ.ಶಂಕ್ರಪ್ಪ, ಡಾ.ಮಹೇಂದ್ರ ಮತ್ತಿತರರು ಉಪಸ್ಥಿತರಿದ್ದರು.

Ad Widget

Related posts

ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಣೆ, ಯಾಕೆ ಗೊತ್ತಾ ?

Malenadu Mirror Desk

ಪರೀಕ್ಷಾ ಶುಲ್ಕ ಹೆಚ್ಚಳ : ಕುಲಪತಿಗಳಿಗೆ ಮನವಿ

Malenadu Mirror Desk

ಮಾ.27ರಂದು ಮೆಗಾ ಲೋಕ ಅದಾಲತ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.