ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿಶೇಷ ಅನುದಾನದಲ್ಲಿ ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜು.13ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಅನೇಕ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಇದಕ್ಕಾಗಿ ಅನುದಾನವೂ ಬಿಡುಗಡೆಯಾಗಿದೆ. ನೀಲನಕ್ಷೆಯೂ ತಯಾರಾಗಿದೆ ಎಂದರು. ಆಯುರ್ವೇದ ವೈದ್ಯಕೀಯ ವಿಶ್ವವಿದ್ಯಾಲಯದ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಅಯುರ್ವೇದ ವೈದ್ಯರನ್ನು ನೇಮಕ ಮಾಡಲು ಅನುಕೂಲವಾಗುವುದರ ಜೊತೆಗೆ ಪಶ್ಚಿಮ ಘಟ್ಟದಲ್ಲಿ ಬೆಳೆಯುವ ಔಷಧಿ ಸಸ್ಯಗಳ ಸಂಶೋಧನೆ ಆಗುತ್ತದೆ. ಇದಕ್ಕಾಗಿ ಸೋಗಾನೆ ಬಳಿ ಅಗತ್ಯ ಭೂಮಿಯನ್ನು ಮಂಜೂರು ಮಾಡಲಾಗಿದೆ ಎಂದರು.
ಕೃಷಿ ಮತ್ತು ತೋಟಗಾರಿಕೆ ವಿವಿ ಸಾಗರ ತಾಲ್ಲೂಕಿನ ಇರುವಕಿಯ್ಯ ಸುಮಾರು 750 ಎಕರೆ ಪ್ರದೇಶದಲ್ಲಿ 290 ಕೋ.ರೂ.ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಇದಕ್ಕಾಗಿ ಹೆಚ್ಚುವರಿ ಹಣದ ಅವಶ್ಯಕತೆ ಇದ್ದು, ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಸಿಬ್ಬಂದಿ ನೇಮಕ, ಸ್ನಾತಕೋತರ ವಿಭಾಗ, ಸಂಶೋಧನಾ ಕೇಂದ್ರಗಳು ಇಲ್ಲಿ ಸ್ಥಾಪಿತವಾಗಿವೆ ಎಂದರು.
ವಿಮಾನ ನಿಲ್ದಾಣದ ಕಾಮಗಾರಿ ಪ್ರಗತಿಯಲಿದ್ದು, ಬರುವ ಏಪ್ರಿಲ್ನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಶಿವಮೊಗ್ಗ, ಶಿಕಾರಿಪುರ, ಆನವಟ್ಟಿ ರಸ್ತೆಯ ವೈಜ್ಞಾನಿಕ ಅಭಿವೃದ್ಧಿಗೆ ಹಾಗೂ ಭೂ ಸ್ವಾಧೀನಕ್ಕಾಗಿ 29.53 ಕೋ.ರೂ.ಬಿಡುಗಡೆಯಾಗಿದೆ. ಇದರ ಜೊತೆಗೆ ಶಿವಮೊಗ್ಗದಲ್ಲಿ ಬಸವೇಶ್ವರ ಪುತ್ಥಯನ್ನು ಸ್ಥಾಪಿಸಲು ಮುಖ್ಯಮಂತ್ರಿಗಳು ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ ವಿಷಯ ಎಂದರು.
ಇದೇ ಸಂದರ್ಭದಲ್ಲಿ ಸಂಸದರ ಅನುದಾನದಲ್ಲಿ ಕೋವಿಡ್ ಸಂಕಷ್ಟದ ನೆರವಿಗಾಗಿ 75ಲಕ್ಷ ರೂ.ಅನುದಾನದಲ್ಲಿ 3 ಸುಸಜ್ಜಿತ ಆ್ಯಂಬುಲೆನ್ಸ್ಗಳನ್ನು ಲೋಕಾರ್ಪಣೆಗೊಳಿಸಲಾಯಿತು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮೇಯರ್ ಸುನೀತಾ ಅಣ್ಣಪ್ಪ, ಪ್ರಮುಖರಾದ ಎಸ್.ದತ್ತಾತ್ರಿ, ಗಿರೀಶ್ ಪಟೇಲ್, ಪವಿತ್ರರಾಮಯ್ಯ, ಬಿ.ಕೆ.ಶ್ರೀನಾಥ್, ಪ್ರಭಾಕರ್, ಕೆ.ವಿ.ಅಣ್ಣಪ್ಪ, ಮಾಲತೇಶ್, ಶಿವರಾಜ್ ಇನ್ನಿತರರು ಉಪಸ್ಥಿತರಿದ್ದರು.
ಸುಮಾರು 12 ಕೋ.ರೋ.ವೆಚ್ಚದಲ್ಲಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜನ್ನು ಅಭಿವೃದ್ಧಿಗೊಳಿಸಲಾಗುವುದು. ಇದರ ಜೊತೆಗೆ ಮೆಡಿಕಲ್ ಕಾಲೇಜಿನಲ್ಲಿ ಕಳೆದ 12 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳ ಖಾಯಂಗೊಳಿಸಲು ವಿಶೇಷ ನೇಮಕಾತಿ ನಿಯಮ ರೂಪಿಸಲು ಮುಖ್ಯಮಂತ್ರಿಗಳು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದ ಅವರು, ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಸುಮಾರು 5ಎಕರೆ ಪ್ರದೇಶದಲ್ಲಿ 200 ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆಯನ್ನು 3 ಕೋ.ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ – ಬಿ.ವೈ.ರಾಘವೇಂದ್ರ, ಸಂಸದ


