ಜಲಶಕ್ತಿ ಅಭಿಯಾನದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸಂತಸ ವ್ಯಕ್ತಪಡಿಸಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ಜಲಶಕ್ತಿ ಅಭಿಯಾನ (ಕ್ಯಾಚ್ ದಿ ರೈನ್) ಮಾರ್ಚ್ ೨೨ ರಂದು ಪ್ರಧಾನ ಮಂತ್ರಿ ಮೋದಿಯವರಿಂದ ಚಾಲನೆಗೊಂಡಿತ್ತು. ಏಪ್ರಿಲ್ ೯ ರಂದು ರಾಜ್ಯದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈಗ ಅದು ಎಲ್ಲ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಈ ಯೋಜನೆಯ ಪ್ರಮುಖ ಉದ್ದೇಶವೇ ಅಂತರ್ಜಲ ಹೆಚ್ಚಿಸುವುದು. ಕೆರೆಗಳ ನಿರ್ಮಾಣ, ಕೃಷಿ ಹೊಂಡ ಚೆಕ್ ಡ್ಯಾಮ್ ಮುಂತಾದವುಗಳ ನಿರ್ಮಾಣ, ವಿಶೇಷವಾಗಿ ಬಯಲು ಸೀಮೆ ಜಿಲ್ಲೆಗಳ ಕೆರೆಗಳಿಗೆ ನೀರು ತುಂಬಿಸುವುದಾಗಿದೆ. ಇಂತಹ ಯೋಜನೆ ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ದೇಶದಲ್ಲಿಯೇ ಮೊದಲ ಸ್ಥಾನ ಪಡೆದಿದೆ. ಎಂದರು.
ಕೇಂದ್ರ ಸರ್ಕಾರ ನಮ್ಮ ಕೆಲಸವನ್ನು ಗುರುತಿಸಿ ಸುಮಾರು ೧೩ ಕೋಟಿ ಮಾನವ ದಿನಗಳನ್ನು ನೀಡಿತ್ತು. ಅದನ್ನು ನವೆಂಬರ್ ತಿಂಗಳಲ್ಲಿಯೇ ಯಶಸ್ವಿಯಾಗಿ ಮುಗಿಸಿ ಕೇಂದ್ರಕ್ಕೆ ಮತ್ತೆ ಬೇಡಿಕೆ ಸಲ್ಲಿಸಿ ಎರಡು ಕೋಟಿ ಮಾನವ ದಿನಗಳನ್ನು ಹೆಚ್ಚುವರಿಯಾಗಿ ನೀಡುವ ಮೂಲಕ ೮೦೦ ಕೋಟಿ ರೂ.ಗಳನ್ನು ಕೇಂದ್ರದಿಂದ ಬಿಡುಗಡೆ ಮಾಡಿಸಿಕೊಂಡು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಿಡಿಒಗಳಿಗೆ ತರಬೇತಿ ಶಿಬಿರ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಆರಂಭವಾಗಿದೆ. ಶಿವಮೊಗ್ಗ ಜಿಲ್ಲೆಯಿಂದ ಆರಂಭಗೊಂಡ ತರಬೇತಿ ಶಿಬಿರ ರಾಜ್ಯಾದ್ಯಂತ ಮುಂದುವರೆಯುತ್ತಿದೆ. ಗ್ರಾಪಂ ಸದಸ್ಯರಿಗೂ ಇದನ್ನು ವಿಸ್ತರಿಸಲಾಗುವುದು ಎಂದರು.
ಜಿಪಂ ವ್ಯಾಪ್ತಿಯಲ್ಲಿ ಬರುವ ರಾಜ್ಯದ ಸುಮಾರು ೨೮ ಸಾವಿರ ಕೆರೆಗಳನ್ನು ಅಭಿವೃದ್ಧಿಪಡಿಸಿಲಾಗುವುದು. ಒತ್ತುವರಿಯನ್ನು ಕಡ್ಡಾಯವಾಗಿ ತೆರವುಗೊಳಿಸಲಾಗುವುದು. ಯಾರು ಎಷ್ಟೇ ಪ್ರಭಾವಶಾಲಿಗಳಾಗಿರಲಿ, ಒತ್ತುವರಿಯಾಗಿದ್ದರೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಮೊದಲು ಮನವಿ ಮಾಡಲಾಗುವುದು. ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಮೇಯರ್ ಸುನಿತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಚನ್ನಬಸಪ್ಪ, ನಾಗರಾಜ್, ಕೆ.ವಿ. ಅಣ್ಣಪ್ಪ, ಹಿರಣ್ಣಯ್ಯ ಇದ್ದರು.


