Malenadu Mitra
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಮಿಟ್ಲಗೋಡು ಕಾಡಿನ ಕೊಲೆ ರಹಸ್ಯ ಬಯಲು ಹೆಂಡತಿ, ಮಕ್ಕಳೇ ಮುಹೂರ್ತವಿಟ್ಟವರು

ವಿನೋದ್‌ಕುಮಾರ್

ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರು ಮತ್ತು ಅಸ್ಥಿ ಪಂಜರದ ರಹಸ್ಯ ಬಯಲಾಗಿದೆ. ವಿನೋದ್‌ಕುಮಾರ್(೪೫) ಮೃತ ವ್ಯಕ್ತಿಯಾಗಿದ್ದು, ಆತನ ಪತ್ನಿ ಬಿನು, ಮಕ್ಕಳಾದ ವಿವೇಕ್, ವಿಷ್ಣು, ಹೆಂಡತಿಯ ತಮ್ಮ ಅಶೋಕ್ ಹಾಗೂ ಮೃತನ ತಮ್ಮ ಸಂಜಯ್‌ನನ್ನು ಕೊಲೆ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾಗರ ತಾಲೂಕಿನ ಆಚಾಪುರ ಗ್ರಾಮದ ಮುಸ್ಲಿಂಪೇಟೆಯ ನಿವಾಸಿ ವಿನೋದ್‌ರನ್ನು ಕೊಲೆಗೈದು ಕಾಡಿನಲ್ಲಿ ಕಾರು ನಿಲ್ಲಿಸಿ ಬೆಂಕಿ ಹಚ್ಚಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಸುಟ್ಟ ಕಾರು, ಅಸ್ಥಿ ಪಂಜರ ಪತ್ತೆಯಾಗಿರುವ ಸಂಬಂಧ ಜೇಡಿಕುಣಿ ಗ್ರಾಮ ಪಂಚಾಯಿತಿ ಸದಸ್ಯರು ದೂರು ನೀಡಿದ್ದರು. ತನಿಖೆ ನಡೆಸಿದ ತೀರ್ಥಹಳ್ಳಿ ಪೊಲೀಸರಿಗೆ ಮೃತ ವಿನೋದ್’ನ ಹೆಂಡತಿ, ಇಬ್ಬರು ಗಂಡು ಮಕ್ಕಳು, ಹೆಂಡತಿಯ ಅಕ್ಕನ ಮಗ ಮತ್ತು ಮೃತನ ತಮ್ಮನ ಕೈವಾಡ ಇರುವುದು ತಿಳಿದುಬಂದಿದೆ.

ಹತ್ಯೆ ಮಾಡಿದ್ದೇಕೆ, ಹೇಗೆ ನಡೆಯಿತು ಕೃತ್ಯ?

ವಿನೋದ್ ಅವರಿಗಿದ್ದ ಅನೈತಿಕ ಸಂಬಂಧ ಕೌಟುಂಬಿಕ ಕಲಹದ ಹಿನ್ನೆಲೆ ವಿನೋದ್‌ನ ಹತ್ಯೆಯಾಗಿದೆ ಎಂದು ತಿಳಿದು ಬಂದಿದೆ. ಇದೆ ಆಧಾರದಲ್ಲಿ ತನಿಖೆ ನಡೆಸಿದಾಗ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಸೆಪ್ಟೆಂಬರ್ ೨೫ರಂದು ಐವರು ಆರೋಪಿಗಳು ವಿನೋದ್ ಕೊಲೆಗೆ ಸಂಚು ರೂಪಿಸಿದ್ದಾರೆ. ಸೆಪ್ಟೆಂಬರ್ ೨೬ರಂದು ಬೆಳಗ್ಗೆ ಆನಂದಪುರದ ಪೆಟ್ರೋಲ್ ಬಂಕ್’ನಲ್ಲಿ ಪೆಟ್ರೋಲ್ ಖರೀದಿಸಿಟ್ಟುಕೊಂಡಿದ್ದರು.
ಸೆ.೨೬ರಂದು ರಾತ್ರಿ ೮.೩೦ರ ಹೊತ್ತಿಗೆ ಮನೆಯಲ್ಲೇ ತಂತಿ ಬಿಗಿಯುವ ರಾಡ್, ಸುತ್ತಿಗೆ, ಕಬ್ಬಿಣದ ಪೈಪ್ ರಾಡ್’ನಿಂದ ಹೊಡೆದು ವಿನೋದ್ ಅವರ ಕೊಲೆ ಮಾಡಲಾಗಿದೆ.

ವಿನೋದ್ ಬಳಸುತ್ತಿದ್ದ ಕಾರಿನಲ್ಲೇ ಅವರ ಮೃತದೇಹವನ್ನು ಸಾಗಿಸಲಾಗಿದೆ. ತನಿಖೆ ವೇಳೆ ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು, ಆರೋಪಿಗಳು ತಮ್ಮ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿ ಮನೆಯಲ್ಲಿಯೇ ಇಟ್ಟು ಹೋಗಿದ್ದರು.

ಕಾರಿನಲ್ಲಿ ಯಡೇಹಳ್ಳಿ, ರಿಪ್ಪನ್ ಪೇಟೆ, ಹುಂಚದಕಟ್ಟೆ, ಶಂಕ್ರಳ್ಳಿ, ಮಲ್ಲೇಸರ ಮಾರ್ಗವಾಗಿ ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಗ್ರಾಮದ ಹುಣಸೆಕೊಪ್ಪ ಅರಣ್ಯ ಪ್ರದೇಶಕ್ಕೆ ಮೃತದೇಹ ತಂದಿದ್ದಾರೆ. ಚಾಲಕನ ಸೀಟಿನಲ್ಲಿ ಮೃತದೇವನ್ನು ಇರಿಸಿದ್ದಾರೆ. ಮೊದಲೆ ಖರೀದಿಸಿಟ್ಟಿದ್ದ ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿದ್ದಾರೆ. ಕಾರಿನ ನಂಬರ್ ಪ್ಲೇಟ್ ಮತ್ತು ವಿನೋದ್ ಬಳಸುತ್ತಿದ್ದ ಮೊಬೈಲ್ ಫೋನನ್ನು ದಾರಿ ಮಧ್ಯೆ ಎಸೆದು ಆರೋಪಿಗಳು ಮನೆಗೆ ಮರಳಿದ್ದರು. ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು ಕೊಲೆ ಮಾಡಿದ್ದ ಜಾಗವನ್ನು ಫಿನಾಯಲ್ ಬಳಸಿ ಸ್ವಚ್ಛಗೊಳಿಸಿದ್ದರು. ಇದಿಷ್ಟೆ ಅಲ್ಲ, ಕೃತ್ಯದ ವೇಳೆ ಆರೋಪಿಗಳು ಬಳಸಿದ್ದ ಬಟ್ಟೆ, ಚಪ್ಪಲಿಗಳನ್ನು ಮನೆಯ ಹಿಂಭಾಗದಲ್ಲಿ ಸುಟ್ಟು ಹಾಕಿದ್ದರು.


ತನಿಖೆ ವೇಳೆ ಮನೆಯವರ ಮೇಲೆಯೇ ಅನುಮಾನಗೊಂಡ ಪೊಲೀಸರು, ವಿಚಾರಣೆ ತೀವ್ರಗೊಳಿಸಿದ್ದರು. ಈ ವೇಳೆ ವಿನೋದ್ ಕೊಲೆಯ ಸಂಪೂರ್ಣ ಮಾಹಿತಿ ಬಹಿರಂಗಗೊಂಡಿದೆ. ಆರೋಪಿಗಳು ಚಾಪೆಕೆಳಗೆ ನುಸುಳಿದ್ದರೆ, ತೀರ್ಥಹಳ್ಳಿ ಪೊಲಿಸರು ರಂಗೋಲಿ ಕೆಳಗೆ ನುಸುಳಿ ಪ್ರಕರಣ ಬೇಧಿಸಿದ್ದಾರೆ. ತನಿಖಾ ತಂಡವನ್ನು ಎಸ್ಪಿ ಬಿ.ಎಂ ಲಕ್ಷಿಪ್ರಸಾದ್ ಪ್ರಶಂಸಿದ್ದಾರೆ.


Ad Widget

Related posts

ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯಕಾರಿಣಿ

Malenadu Mirror Desk

ಸರಕಾರದ ಸೌಲಭ್ಯ ಸಾಮಾನ್ಯ ಜನರಿಗೂ ತಲುಪಲಿ: ಸಚಿವ ಮಧುಬಂಗಾರಪ್ಪ,ಜನತಾದರ್ಶನದಲ್ಲಿ ಜಿಲ್ಲೆಯ ಜನರ ಸಮಸ್ಯೆಗಳ ಅನಾವರಣ, ಸರಕಾರಿ ಬಸ್, ಹಕ್ಕುಪತ್ರ, ಗೃಹಲಕ್ಷ್ಮಿಗೇ ಹೆಚ್ಚಿನ ಮನವಿ

Malenadu Mirror Desk

ಕಾಂಗ್ರೆಸ್ ಒಡೆದ ಮನೆಯಾಗಿದೆ, ಸಿದ್ದರಾಮಯ್ಯ ವಿರುದ್ಧ ಅಲ್ಲಿ ಅಲೆ ಎದ್ದಿದೆ : ಕೆ.ಎಸ್.ಈಶ್ವರಪ್ಪ ಲೇವಡಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.