Malenadu Mitra
ರಾಜ್ಯಶಿಕಾರಿಪುರಶಿವಮೊಗ್ಗಸೊರಬ

ಗಾಂಧೀಜಿ ಪ್ರತಿಮೆ ಧ್ವಂಸ ,ಹೊಳೆಹೊನ್ನೂರಲ್ಲಿ ಬಿಗುವಿನ ವಾತಾವರಣ, ಆರೋಪಿಗಳ ಬಂಧನಕ್ಕೆ ಸಾರ್ವಜನಿಕರ ಆಗ್ರಹ

ಶಿವಮೊಗ್ಗ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿ ನಡೆದಿದೆ.
ಭಾನುವಾರ ತಡರಾತ್ರಿ ಕೃತ್ಯ ನಡೆದಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಸರ್ಕಲ್‌ನಲ್ಲಿ ಗಾಂಧಿ ಪ್ರತಿಮೆ, ಅದರ ಸುತ್ತಲು ಮಂಟಪ ನಿರ್ಮಿಸಲಾಗಿದೆ. ಈ ಮಂಟಪದೊಳಗಿದ್ದ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ. ಕಿಡಿಗೇಡಿಗಳ ಪತ್ತೆಗಾಗಿ ಸಮೀಪದ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಗುವಿನ ವಾತಾವರಣ:
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿ, ಹೊಳೆಹೊನ್ನೂರು ಗಾಂಧಿ ಸರ್ಕಲ್ ಬಳಿ ರಸ್ತೆ ತಡೆ ನಡೆಸಿದರು.
ಭಾನುವಾರ ತಡರಾತ್ರಿ ಹೊಳೆಹೊನ್ನೂರಿನ ಗಾಂಧಿ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದರು. ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದರು. ಅಲ್ಲದೆ ಗಾಂಧಿ ಪ್ರತಿಮೆ ಮುಂಭಾಗ ರಸ್ತೆ ತಡೆ ನಡೆಸಿದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೊಳೆಹೊನ್ನೂರಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.



ಹೊಳೆಹೊನ್ನೂರು ಪಟ್ಟಣದ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಕೆಲವು ಕಿಡಿಗೇಡಿಗಳು ಹಾನಿ ಉಂಟು ಮಾಡಿದ್ದಾರೆ. ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಮೂರು ತಂಡ ರಚನೆ ಮಾಡಲಾಗಿದೆ.
-ಮಿಥುನ್ ಕುಮಾರ್,ಜಿ.ಕೆ ,

ಕಠಿಣ ಶಿಕ್ಷೆಯ ಎಚ್ಚರಿಕೆ ನೀಡಿದ ಸಿಎಂ

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯವರು ತೀವ್ರವಾಗಿ ಖಂಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು,ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Ad Widget

Related posts

ಆರ್’ಎಎಫ್ ಘಟಕದಿಂದ ಭದ್ರಾವತಿ ಏಳಿಗೆ

Malenadu Mirror Desk

ಜಿಲ್ಕಾಡಳಿತದ ಭರವಸೆ , ಕಾರ್ಗಲ್ ಧರಣಿ ತಾತ್ಕಾಲಿಕ ವಾಪಸ್

Malenadu Mirror Desk

ಶಿವಮೊಗ್ಗದಲ್ಲಿ 846 ಕೊರೊನ ಪ್ರಕರಣ, 6 ಸಾವು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.